ಬೆಂಗಳೂರು: ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಜನರನ್ನು ಈಗಾಗಲೇ ಬಂಧಿಸಲಾಗಿದೆ. ಯಾವುದೇ ಜಾತಿ - ಧರ್ಮಗಳನ್ನು ಸರ್ಕಾರ ಪರಿಗಣಿಸದೇ ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮದ್ದೂರು ಗಲಭೆಗೆ ಸಂಬಂಧಪಟ್ಟಂತೆ ಬಿಜೆಪಿಯವರು ಮದ್ದೂರಿಗೆ ಪಾದಯಾತ್ರೆ ನಡೆಸುತ್ತಿರುವ ಬಗ್ಗೆ ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶ. ಮೈಸೂರಿನಲ್ಲಿ ಚಾಮುಂಡಿ ಬೆಟ್ಟ ಚಲೋ ಎಂಬ ಕಾರ್ಯಕ್ರಮ ಮಾಡಿದರು. ಆದರೆ, ಅದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ ಎಂದರು.
ಮೈಸೂರು ಬೆಟ್ಟ ಚಲೋ ರ್ಯಾಲಿಯಲ್ಲಿ ಆರ್ಎಸ್ಎಸ್ ಸಂಘಟನೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರದಿಂದ ಜನರಲ್ಲಿ ಕರೆಸಿದ್ದರು. ಶಾಂತಿ ಕದಡುವ ಕೆಲಸ ಮಾಡಬೇಕು ಎಂಬುದು ಬಿಜೆಪಿಯ ಉದ್ದೇಶ. ಈಗ, ಮದ್ದೂರಿನಲ್ಲಿ ಬಂದ್ ಮಾಡಲು ಕರೆ ನೀಡಿದ್ದಾರೆ. ಗಲಭೆಯಲ್ಲಿ ನಿರತರಾಗಿದ್ದ ಯಾವುದೇ ಪಕ್ಷ, ಸಮುದಾಯವರೇ ಆಗಿದ್ದರೂ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಮಣಿಪುರ ಹಿಂಸಾಚಾರದ ಬಗ್ಗೆ ಬಿಜೆಪಿ ಧ್ವನಿ ಎತ್ತಲ್ಲ: ಬಿಜೆಪಿಯವರು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವುದಾಗಿ ಕೇಂದ್ರ ಗೃಹ ಸಚಿವರಿಗೆ ದೂರು ನೀಡಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿದೆ. ಕೇಂದ್ರದಲ್ಲಿ ರೈತ ಚಳವಳಿಯಲ್ಲಿ ಅನೇಕ ರೈತರು ಪ್ರಾಣ ಕಳೆದುಕೊಂಡ ಸಂದರ್ಭದಲ್ಲಿ ಬಿಜೆಪಿಯವರು ಎಲ್ಲಿದ್ದರು.? ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಯಾವುದೇ ಬಿಜೆಪಿಗರು ಧ್ವನಿ ಎತ್ತಲಿಲ್ಲ ಏಕೆ ಎಂದು ಮರುಪ್ರಶ್ನಿಸಿದರು. ಮಣಿಪುರದಲ್ಲಿ ತೀವ್ರ ಹಿಂಸಾಚಾರ ನಡೆದರೂ, ಪ್ರಧಾನಿ ಮೋದಿ ಅವರು ಅಲ್ಲಿಗೆ ಯಾಕೆ ಭೇಟಿ ನೀಡಲಿಲ್ಲ ಎಂದು ಕೇಳಿದರು.
ಎಂಎಲ್ಸಿಗಳಿಗೂ ಅನುದಾನ ನೀಡುವ ಆಶ್ವಾಸನೆ: ಆಡಳಿತ ಪಕ್ಷದ ವಿಧಾನಪರಿಷತ್ತಿನ ಸದಸ್ಯರೊಂದಿಗೆ ಇಂದು ಸಭೆ ನಡೆಸಲಾಗಿದೆ. ಈ ಹಿಂದೆ ಜಿಲ್ಲಾ ಶಾಸಕರೊಂದಿಗೆ ಸಭೆ ನಡೆಸಿದಂತೆ, ನಾಳೆ ಬೆಂಗಳೂರು ನಗರದ ಶಾಸಕರೊಂದಿಗೆ ಸಭೆ ನಡೆಸಲಾಗುವುದು. ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಆಯವ್ಯಯದಲ್ಲಿ 8 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದೆ. ಶಾಸಕರಿಗೆ ನೀಡಿದಂತೆ ಎಂಎಲ್ಸಿಗಳಿಗೂ, ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುವಂತೆ ಬೇಡಿಕೆ ಬಂದಿದೆ. ಮೀಸಲಿರುವ 8 ಸಾವಿರ ಕೋಟಿ ರೂ.ಗಳಲ್ಲಿ ಎಂಎಲ್ಸಿಗಳಿಗೂ ಅನುದಾನ ನೀಡಲು ಪರಿಶೀಲಿಸುವುದಾಗಿ ಆಶ್ವಾಸನೆ ನೀಡಲಾಗಿದೆ ಎಂದು ತಿಳಿಸಿದರು.