ಅಕ್ರಮ ಗಣಿಗಾರಿಕೆ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ ಒತ್ತಿದ ರಾಜ್ಯಪಾಲರು

ಅಕ್ರಮ ಗಣಿಗಾರಿಕೆ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ ಒತ್ತಿದ ರಾಜ್ಯಪಾಲರು
By Published : September 10, 2025 at 6:48 PM IST

ಬೆಂಗಳೂರು: ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ಅಧಿನಿಯಮ, 2025 ಕ್ಕೆ ರಾಜ್ಯಪಾಲರಿಂದ ಒಪ್ಪಿಗೆ ಸಿಕ್ಕಿದೆ. ಈ ಅಧಿನಿಯಮ ದಿನಾಂಕ: 09-09-2025 (ಮಂಗಳವಾರ) ರಿಂದ ಅಧಿಕೃತವಾಗಿ ಜಾರಿಗೆ ಬಂದಿದೆ.

ಕರ್ನಾಟಕ ರಾಜ್ಯದಲ್ಲಿ ಲೆಕ್ಕವಿಲ್ಲದಷ್ಟು ಸಂಖ್ಯೆಯ ಗುತ್ತಿಗೆದಾರರು, ಸಾಗಾಣಿಕೆದಾರರು, ರಫ್ತುದಾರರು, ದಾಸ್ತಾನುದಾರರು, ಖರೀದಿದಾರರು ಮತ್ತು ಇತರ ಮಧ್ಯವರ್ತಿಗಳು ಸೇರಿದಂತೆ ಬಹು ವಹಿವಾಟುಗಳನ್ನು ಒಳಗೊಂಡ ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಂದ ಸಂಘಟಿತ ಅಪರಾಧ, ವ್ಯವಸ್ಥಿತ ಒಳಸಂಚು ಮತ್ತು ಅಪರಾಧ ಉತ್ಪತ್ತಿಗಳಿಂದಾದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲು, ಜಪ್ತಿ ಮಾಡಲು, ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ವಸೂಲಿ ಆಯುಕ್ತರೊಬ್ಬರ ನೇಮಕಾತಿಯ ಅವಶ್ಯಕತೆಯನ್ನು ಸರ್ಕಾರ ಮನಗಂಡಿದೆ. ಈ ಅಧಿನಿಯಮವನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಲಾಗಿತ್ತು. ಇದೀಗ ಗವರ್ನರ್​ ಒಪ್ಪಿಗೆ ಪಡೆದು ಬುಧವಾರ ಅಧಿಸೂಚನೆ ಹೊರಡಿಸಿದೆ.

ಆಸ್ತಿ ಜಪ್ತಿ ಮಾಡಲು ಸರ್ಕಾರಕ್ಕೆ ಅಧಿಕಾರ: ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಮುಟ್ಟುಗೋಲು ಹಾಕಿಕೊಳ್ಳಬಹುದಾದ ಆಸ್ತಿಯನ್ನು ಗುರುತಿಸಿ, ಅಂತಹ ಆಸ್ತಿಯನ್ನು ಜಪ್ತಿ ಮಾಡಲು ಸರ್ಕಾರಕ್ಕೆ ಅಧಿಕಾರ ದೊರಕಿದೆ. ಅಕ್ರಮ ಗಣಿಗಾರಿಕೆ ಕುರಿತು ನಂದಿ ಗಿರಿಧಾಮದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆಯಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹೆಚ್. ಕೆ. ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ: 05.07.2025 ರಂದು ಸಚಿವ ಸಂಪುಟದ ಉಪಸಮಿತಿ ರಚನೆಯಾಗಿತ್ತು. ಈ ಸಮಿತಿಯು ದಿನಾಂಕ: 13.08.2025 ರಂದು ಸಚಿವ ಸಂಪುಟಕ್ಕೆ ತನ್ನ ವರದಿಯನ್ನು ಸಲ್ಲಿಸಿತ್ತು. ಈ ವರದಿಯ ಜೊತೆಗೆ ಕರಡು ಮಸೂದೆಯನ್ನು ಸಹ ಸಚಿವ ಸಂಪುಟಕ್ಕೆ ಮಂಡಿಸಿತ್ತು. ಈ ಮಸೂದೆಯೊಂದಿಗೆ ಸಚಿವ ಸಂಪುಟದ ಉಪಸಮಿತಿಯ ವರದಿಯನ್ನು ಸಚಿವ ಸಂಪುಟವು ಸರ್ವಾನುಮತದಿಂದ ಅಂಗೀಕರಿಸಿ, ಅಕ್ರಮ ಗಣಿಗಾರಿಕೆ ವಿರುದ್ಧ ಅತ್ಯಂತ ಕಠಿಣಾತಿ-ಕಠಿಣ ಕ್ರಮಗಳನ್ನು ಕೈಗೊಳ್ಳಲು ಅನುಮೋದನೆ ನೀಡಿತ್ತು.

ವಿಧಾನಸಭೆಯಲ್ಲಿ ಮಂಡನೆ ಆಗಿದ್ದ ಮಸೂದೆ: ರಾಜ್ಯ ಸಚಿವ ಸಂಪುಟದ ನಿರ್ಣಯದಂತೆ ದಿನಾಂಕ: 18-08-2025 ರಂದು ವಿಧಾನಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಲಾಗಿತ್ತು. ದಿನಾಂಕ: 21.08.2025 ರಂದು ವಿಧಾನಸಭೆಯಲ್ಲಿ ಮತ್ತು ದಿನಾಂಕ: 22-08-2025 ರಂದು ವಿಧಾನ ಪರಿಷತ್ತಿನಲ್ಲಿ ಮಸೂದೆಯನ್ನು ಮಂಡಿಸಿ, ಅಂಗೀಕರಿಸಲಾಗಿತ್ತು.

ಈ ವಸೂಲಾತಿ ಆಯುಕ್ತರ ನೇಮಕದಿಂದಾಗಿ ರಾಜ್ಯದಲ್ಲಿ ಆರ್ಥಿಕ ಶಿಸ್ತು ತರಲು ಸೂಕ್ತವಾದಂತಹ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್. ಕೆ. ಪಾಟೀಲ್ ತಿಳಿಸಿದ್ದಾರೆ.

📚 Related News