ಒಂದೇ ಒಂದು ಕೈಗಾರಿಕೆಯೂ ರಾಜ್ಯದಿಂದ ಹೊರ ಹೋಗಿಲ್ಲ: ಸಚಿವ ಎಂ.ಬಿ.ಪಾಟೀಲ್​

ಒಂದೇ ಒಂದು ಕೈಗಾರಿಕೆಯೂ ರಾಜ್ಯದಿಂದ ಹೊರ ಹೋಗಿಲ್ಲ: ಸಚಿವ ಎಂ.ಬಿ.ಪಾಟೀಲ್​
By Published : October 29, 2025 at 2:27 PM IST

ಮೈಸೂರು:ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಅತ್ಯಗತ್ಯವಾದ ಕೆಲಸದ ವಾತಾವರಣ ಅತ್ಯುತ್ತಮವಾಗಿದೆ. ಇಲ್ಲಿ ಅತ್ಯುತ್ತಮ ಪ್ರತಿಭಾ ಸಂಪನ್ಮೂಲವಿದೆ. ಸರ್ಕಾರದ ಕೈಗಾರಿಕಾ ನೀತಿಗಳು ಚೆನ್ನಾಗಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್​ ಹೇಳಿದ್ದಾರೆ.

ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಅವರು, ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಿಂದ ಒಂದೇ ಒಂದು ಕೈಗಾರಿಕೆಯೂ ಹೊರ ಹೋಗಿಲ್ಲ. ಈ ವಿಚಾರವಾಗಿ ಹಬ್ಬಿಸುತ್ತಿರುವ ತಪ್ಪು ಕಲ್ಪನೆಯಿಂದ ಎಲ್ಲರೂ ಹೊರಬರಬೇಕಾಗಿದೆ ಎಂದರು. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕಳೆದ ಫೆಬ್ರವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಲಾಯಿತು. ಇದರ ಮೂಲಕ 10.

27 ಲಕ್ಷ ಕೋಟಿ ರೂ. ಬಂಡವಾಳ ಹರಿದು ಬರುವ ಖಾತ್ರಿ ಸಿಕ್ಕಿತು. ಈ ಪೈಕಿ ಶೇ. 60ಕ್ಕಿಂತ ಹೆಚ್ಚು ಬಂಡವಾಳ ಈಗಾಗಲೇ ನಮ್ಮಲ್ಲಿ ಹೂಡಿಕೆಯಾಗಿದೆ. ನಾವು ಬರೀ ಮಾತನಾಡುವುದಿಲ್ಲ, ನುಡಿದಂತೆ ನಡೆಯುತ್ತಿದ್ದೇವೆ.

ಈ ಹೂಡಿಕೆಗಳಿಂದ ಸಾವಿರಾರು ಉದ್ಯೋಗಗಳೂ ಸೃಷ್ಟಿಯಾಗುತ್ತಿವೆ ಎಂದು ತಿಳಿಸಿದರು. ನಾನು ಕೈಗಾರಿಕಾ ಸಚಿವನಾದ ಮೇಲೆ ಹಲವು ದೇಶಗಳಿಗೆ ಭೇಟಿ ಕೊಟ್ಟು, ಹೂಡಿಕೆದಾರರನ್ನು ರಾಜ್ಯಕ್ಕೆ ಕರೆತರುತ್ತಿದ್ದೇನೆ. ಫಾಕ್ಸ್‌ಕಾನ್ ತರಹದ ದೈತ್ಯ ಕಂಪನಿಯು ತೈವಾನ್ ನಂತರದ ತನ್ನ ಬೃಹತ್ ಘಟಕವನ್ನು ನಮ್ಮಲ್ಲಿ ಆರಂಭಿಸಿದೆ. ಇಲ್ಲಿಂದ ದುಬಾರಿ ಮೊಬೈಲ್ ಫೋನ್​ಗಳು ರಫ್ತಾಗುತ್ತಿವೆ. ಜಪಾನ್ ತರಹದ ಸಂಪ್ರದಾಯವಾದಿ ದೇಶದಿಂದ ಕಳೆದ ಎರಡು ವರ್ಷಗಳಲ್ಲಿ ರಾಜ್ಯಕ್ಕೆ 10,500 ಕೋಟಿ ರೂ.

ಬಂಡವಾಳ ಹೂಡಿಕೆಯ ಖಾತ್ರಿ ಸಿಕ್ಕಿದೆ. ಸಾಮಾನ್ಯವಾಗಿ ಅಲ್ಲಿ ಕುಟುಂಬ ಪರಿವಾರಗಳೇ ಕೈಗಾರಿಕೆ ನಡೆಸುವುದರಿಂದ, ನಿರ್ಧಾರ ತೆಗೆದುಕೊಳ್ಳುವುದು ನಿಧಾನವಾಗುತ್ತದೆ. ಆದರೂ ನಮ್ಮ ವಿಚಾರದಲ್ಲಿ ಎಲ್ಲವೂ ತ್ವರಿತ ಗತಿಯಲ್ಲಿ ನಡೆದಿದೆ. ಒಸಾಕಾವಾ ಕಂಪನಿ ಕೂಡ ಹೂಡಿಕೆ ಮಾಡಲು ಮುಂದೆ ಬಂದಿದೆ ಎಂದು ಹೇಳಿದರು. ನಮ್ಮಲ್ಲಿ ಸೆಮಿಕಂಡಕ್ಟರ್ ಸೇರಿದಂತೆ ಹಲವು ಕ್ಷೇತ್ರಗಳಿಗೆ ಪ್ರೋತ್ಸಾಹವಿದೆ.

ನಮ್ಮ ಕೈಗಾರಿಕಾ ನೀತಿ ಉದ್ಯಮಸ್ನೇಹಿಯಾಗಿದೆ. ಆದರೆ ಕೇಂದ್ರ ಸರ್ಕಾರ ಸೆಮಿಕಂಡಕ್ಟರ್ ಮಿಷನ್ ಅಡಿಯಲ್ಲಿ ವಿಶೇಷ ಪ್ರೋತ್ಸಾಹನಾ ಕ್ರಮಗಳನ್ನು ಹೊಂದಿದ್ದು, ಈ ಕಂಪನಿಗಳು ಬಿಜೆಪಿ ಆಡಳಿತವಿರುವ ಗುಜರಾತ್, ಮಹಾರಾಷ್ಟ್ರ ಮುಂತಾದ ರಾಜ್ಯಗಳಿಗೆ ಹೋಗುತ್ತಿವೆ. ಇದರಲ್ಲಿ ನಮ್ಮ ತಪ್ಪೇನೂ ಇಲ್ಲ. ಹಿಂದೆ ಒಂದು ಕಂಪನಿ ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ರಾಜ್ಯದಲ್ಲೇ ಹೂಡಿಕೆ ಮಾಡಲು ತೀರ್ಮಾನಿಸಿತ್ತು. ಆದರೆ, ದೆಹಲಿಗೆ ಹೋದ ಮೇಲೆ ಅವರು ಮನಸ್ಸು ಬದಲಿಸಿದರು.

ಕೇಂದ್ರ ಸರ್ಕಾರವು ಇಂತಹ ತಾರತಮ್ಯವನ್ನು ಬಿಡಬೇಕು ಎಂದು ಆಗ್ರಹಿಸಿದರು. ಇವುಗಳನ್ನೂ ಓದಿ:.

📚 Related News